ಬೆಂಗಳೂರು, ಫೆ. 03 (DaijiworldNews/TA): ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಸಾವಿನ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಗ್ರಹಿಸಿದ್ದಾರೆ.

ಸೋಮವಾರ ವಿಧಾನಸಭೆಯ ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜಾ, ಗೃಹ ಸಚಿವರ ಗಮನವನ್ನು ಈ ಪ್ರಕರಣದತ್ತ ಸೆಳೆದರು. “ಇದು ಕೇವಲ ಒಬ್ಬ ಬಾಲಕನ ಸಾವಿನ ತನಿಖೆಯಲ್ಲ. ಈ ಘಟನೆ ಬಗ್ಗೆ ಜಿಲ್ಲೆಯಾದ್ಯಂತ ಜನರು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ” ಎಂದು ಅವರು ಹೇಳಿದರು.
ಸುಮಂತ್ ಸಾವಿನ ಹಿಂದಿರುವ ಸತ್ಯಾಸತ್ಯತೆಗಳನ್ನು ಸಮಗ್ರವಾಗಿ ತನಿಖೆ ನಡೆಸಿ ಜನತೆಗೆ ಸ್ಪಷ್ಟವಾಗಿ ತಿಳಿಸಬೇಕು ಎಂದು ಒತ್ತಾಯಿಸಿದ ಅವರು, ಪ್ರಕರಣವನ್ನು ಲಘುವಾಗಿ ಪರಿಗಣಿಸದೇ ನ್ಯಾಯ ದೊರಕಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸದನದಲ್ಲಿ ಆಗ್ರಹಿಸಿದರು. ಈ ದುರ್ಘಟನೆ ಸಂಬಂಧ ಶೀಘ್ರ ಮತ್ತು ಪಾರದರ್ಶಕ ತನಿಖೆ ನಡೆಯಬೇಕೆಂಬುದು ಜಿಲ್ಲೆಯ ಜನರ ನಿರೀಕ್ಷೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.