ಬೆಂಗಳೂರು, 06 (DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.
ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರದರ್ಶಿಸಿದರು. ಯುವಕರಿಗೆ ಮೋಸ ಮಾಡಿದ ಸರಕಾರಕ್ಕೆ ಧಿಕ್ಕಾರ, 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರಕಾರಕ್ಕೆ ಧಿಕ್ಕಾರ, ಬಜೆಟ್ಟಂತೆ ಬಜೆಟ್ ಖಾಲಿ ಚೊಂಬಿನ ಬಜೆಟ್- ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು.
ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂದು ಕೂಗಿದರು. ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರಕಾರಕ್ಕೆ ಧಿಕ್ಕಾರ ಎಂದು ಕೂಗಲಾಯಿತು.