ಹುಬ್ಬಳ್ಳಿ, ಮಾ. 17 (DaijiworldNews/TA) : ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನಡೆಯುತ್ತಿರುವ ಅನ್ಯಾಯವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವಿರೋದಿಸಿದೆ. ಕಳೆದ ಕೆಲವು ವರ್ಷಗಳಿಂದ ರೈಲ್ವೇಯಲ್ಲಿ ಕನ್ನಡದಲ್ಲಿ ಪರೀಕ್ಷಾ ಅವಕಾಶ ನೀಡುವಂತೆ ಹೋರಾಟ ನಡೆಸಿದರೂ, ಇದೀಗ ನಡೆದ ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ನಡೆಸಿದ ಕಾರಣ, ಕನ್ನಡಿಗರ ಆಕ್ರೋಶ ತೀವ್ರವಾಗಿದೆ.

ಹುಬ್ಬಳ್ಳಿಯ ರೈಲ್ವೆ ನೇಮಕಾತಿ ಕೋಶದ ಕಚೇರಿಯಲ್ಲಿ ನಡೆದ ಕಂಪ್ಯೂಟರ್ ಆಧಾರಿತ ಪದೋನ್ನತಿ ಪರೀಕ್ಷೆಗೆ ಅಭ್ಯರ್ಥಿಗಳು ಸಜ್ಜಾಗಿದ್ದರು. ಆದರೆ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗದಿರುವುದರಿಂದ, ಕರವೇ ಸಂಘಟನೆಯ ಕಾರ್ಯಕರ್ತರು ಕೋಶದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹೋರಾಟದ ಪರಿಣಾಮವಾಗಿ, ನೇಮಕಾತಿ ಕೋಶಾಧಿಕಾರಿಗಳು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದರು ಮತ್ತು ಕೇಂದ್ರಕ್ಕೆ ಬಂದಿದ್ದ ಅಭ್ಯರ್ಥಿಗಳನ್ನು ಹಿಂದಿರುಗಿಸಿದರು.
ಕರವೇ ಹೋರಾಟಗಾರ ಹನುಮಂತಪ್ಪ ಅಬ್ಬಿಗೇರಿ ಈ ಸಂದರ್ಭದಲ್ಲಿ, “ಪದೋನ್ನತಿ ಪರೀಕ್ಷೆಯನ್ನು ಮುಂದೂಡಬೇಕು ಮತ್ತು ಕನ್ನಡದಲ್ಲಿ ಮಾತ್ರ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ. ಈ ಮೂಲಕ, ಸರ್ಕಾರ ಮತ್ತು ರೈಲ್ವೆ ಇಲಾಖೆ ಮುಂದೆ ಭಾಷಾ ತಾರತಮ್ಯವು ಕಾಡದಂತೆ ಕಟ್ಟೆಚ್ಚರ ವಹಿಸಬೇಕು ಎಂಬ ಸಂದೇಶ ನೀಡಲಾಗಿದೆ.
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ರಾಜ್ಯದ ಸಂಸದರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದಿಂದ ರೈಲ್ವೆ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಒತ್ತಾಯ ಮಾಡಿದ್ದಾರೆ. ಅಭ್ಯರ್ಥಿಗಳಿಗೆ ತಮ್ಮ ಮೂಲಭೂತ ಸಾಂವಿಧಾನಿಕ ಹಕ್ಕು - ತಮ್ಮ ರಾಜ್ಯ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ - ನೀಡಲಾಗದೇ ಇರುವುದರಿಂದ ತೀವ್ರ ಅಸಮಾಧಾನ ಉಂಟಾಗಿದ್ದು, ಸಮಾನ ಅವಕಾಶಗಳ ಸಿದ್ಧಾಂತಕ್ಕೆ ರೈಲ್ವೆ ಇಲಾಖೆಯು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಒತ್ತಾಯಿಸಲಾಗಿದೆ.