ಮೈಸೂರು, ಆ. 03 (DaijiworldNews/ AK): ವಿದೇಶಕ್ಕೆ ತೆರಳಿದ್ದ ಮೈಸೂರಿನ ಜನರಿಗೆ ಆಫ್ರಿಕಾದಲ್ಲಿ ಭಾರೀ ಆಘಾತ ಎದುರಾಗಿದೆ. ಸೂಕ್ತ ಕಾನೂನು ಅನುಮತಿ ಹಾಗೂ ನಿಯಮಾವಳಿಗಳನ್ನು ಪಾಲಿಸದೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ, ಮೈಸೂರು ಮೂಲದ ಒಂಬತ್ತು ಜನರನ್ನು ಆಫ್ರಿಕಾ ದೇಶದ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪಕ್ಷಿರಾಜಪುರ ಗ್ರಾಮಕ್ಕೆ ಸೇರಿದ ಈ 9 ಮಂದಿ, ಸುಮಾರು ಎರಡು ತಿಂಗಳ ಹಿಂದೆ ಆಯುರ್ವೇದದ ವಿಶೇಷ ತೈಲ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಆಫ್ರಿಕಾಗೆ ಪ್ರವಾಸಕ್ಕೆ ತೆರಳಿದ್ದರು.
ಆದರೆ, ಅಲ್ಲಿನ ಸ್ಥಳೀಯ ಸರ್ಕಾರ ಮತ್ತು ಅರಣ್ಯ/ವಾಣಿಜ್ಯ ಇಲಾಖೆಗಳಿಂದ ಅಧಿಕೃತ ಅನುಮತಿ ಪಡೆಯದೆ ವ್ಯಾಪಾರ ನಡೆಸುತ್ತಿದ್ದಾರೆ ಎನ್ನಲಾದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ನಿರೋಣಿ ಸೇರಿದಂತೆ ಪ್ರಭುದೇವ, ಗಿರೀಶ್, ಷಹಜಹಾನ್, ಶಾಂತಿ ಹಾಗೂ ಇತರ ನಾಲ್ವರು ಸೇರಿದ್ದಾರೆ.
ವಿದೇಶದಲ್ಲಿ ಬಂಧನಕ್ಕೊಳಗಾಗಿರುವ ತಮ್ಮ ಕುಟುಂಬ ಸದಸ್ಯರನ್ನು ರಕ್ಷಿಸಿ, ಭಾರತಕ್ಕೆ ವಾಪಸ್ ಕರೆತರಲು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಸಂತ್ರಸ್ತ ಕುಟುಂಬಸ್ಥರು ಹುಣಸೂರು ಕ್ಷೇತ್ರದ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ವಿಷಯದ ಗಂಭೀರತೆಯನ್ನು ಅರಿತ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರು, ಕೂಡಲೇ ಸಚಿವ ಡಾ. ಯತೀಂದ್ರ ಅವರ ಗಮನಕ್ಕೆ ತಂದಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಆಫ್ರಿಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮೂಲಕ ಮಾತುಕತೆ ನಡೆಸಿ, ಬಂಧಿತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಲು ಅಗತ್ಯ ರಾಜತಾಂತ್ರಿಕ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.