ಬೆಂಗಳೂರು, ಆ. 20 (DaijiworldNews/AK): ರಾಜ್ಯ ಸರಕಾರಕ್ಕೆ ಮಾನ ಮರ್ಯಾದೆ ಇದ್ದರೆ ತಕ್ಷಣ ನಾಗೇಂದ್ರರ ರಾಜೀನಾಮೆ ಪಡೆಯಲಿ ಹಾಗೂ ಬರ, ಕೆಪಿಎಸ್ಸಿ ಹಗರಣ ಮತ್ತಿತರ ಸಮಸ್ಯೆಗಳ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಸಚಿವ ನಾಗೇಂದ್ರರ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಬಿಜೆಪಿಯ ಕಾರ್ಯಕರ್ತರು ಎರಡು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ- ಜೆಡಿಎಸ್ ಒಟ್ಟಾಗಿ ಸದನದ ಒಳಗೆ ಭ್ರಷ್ಟ ಸಚಿವ ನಾಗೇಂದ್ರ ಕೈಬಿಡಲು ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಭ್ರಷ್ಟಾಚಾರ ಮಾಡಿದ ನಾಗೇಂದ್ರರನ್ನು ಕಂಡರೆ ಸಿಎಂಗೆ ಭಯವೇಕೆ ಎಂದು ಪ್ರಶ್ನಿಸಿದರು. ಭ್ರಷ್ಟಾಚಾರಕ್ಕೆ ಜಾತಿಯ ಬಣ್ಣ ಕಟ್ಟುವ ಷಡ್ಯಂತ್ರ ಮಾಡಬೇಡಿ ಎಂದು ತಿಳಿಸಿದರು.
ದುಡ್ಡು ಹೊಡೆಯಬೇಕಾದರೆ ನಾಗೇಂದ್ರ ಅವರು ಯೋಚನೆ ಮಾಡಬೇಕು ಎಂದು ಹೇಳಿದರು. ಸದನ ನಡೆದು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲು ನಾಗೇಂದ್ರರ ರಾಜೀನಾಮೆ ಪಡೆಯಲಿ ಎಂದು ಒತ್ತಾಯಿಸಿದರು. ಕಿವಿಗೆ ಹೂ ಮುಡಿಸುವ ಕೆಲಸ ಮಾಡಬೇಡಿ ಎಂದು ಆಗ್ರಹಿಸಿದರು.