ಎರ್ನಾಕುಲಂ, ಆ. 27 (DaijiworldNews/TA): ಜಿಲ್ಲೆಯ ಕಕ್ಕೂರ್ ಬಳಿ ಗುರುವಾರ 35 ಪ್ರಯಾಣಿಕರಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್ನತ್ತ ನುಗ್ಗಿ ಉರುಳಿಬಿದ್ದಿದೆ. ಅವಘಡದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲಡಿಯಿಂದ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ದ್ವಿಚಕ್ರ ವಾಹನ ಸವಾರನೊಬ್ಬ ಯಾವುದೇ ಮುನ್ಸೂಚನೆ ನೀಡದೆ ದಿಢೀರನೆ ಬಲಕ್ಕೆ ತಿರುವು ಪಡೆದುಕೊಂಡಿದ್ದಾನೆ. ಆತನನ್ನು ರಕ್ಷಿಸಲು ಬಸ್ ಚಾಲಕ ತಕ್ಷಣವೇ ಬ್ರೇಕ್ ಹಾಕಿ ಬಸ್ ಅನ್ನು ಬದಿಗೆ ತಿರುಗಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್, ರಸ್ತೆಯಿಂದ ಪಕ್ಕಕ್ಕೆ ಸಾಗಿ ಪೆಟ್ರೋಲ್ ಬಂಕ್ನ ಪಕ್ಕದ ಭಾಗಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ ಉರುಳಿಬಿದ್ದ ಪರಿಣಾಮ ಹಲವು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ತಕ್ಷಣವೇ ಧಾವಿಸಿ ಅವರನ್ನು ಹೊರತೆಗೆಯಲು ನೆರವಾಗಿದ್ದಾರೆ.
ಬಳಿಕ ಆಂಬ್ಯುಲೆನ್ಸ್ಗಳ ಮೂಲಕ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಪೆಟ್ರೋಲ್ ಬಂಕ್ ಆವರಣದಲ್ಲಿ ಆ ಸಮಯದಲ್ಲಿ ಇತರ ವಾಹನಗಳು ಅಥವಾ ಸಾರ್ವಜನಿಕರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.