ನವದೆಹಲಿ, ಸೆ.16 (DaijiworldNews/AK): ಜಂತರ್ ಮಂತರ್ನಲ್ಲಿ ಜುಲೈ 20ರಂದು ನಡೆದ ಸಿಜೆಪಿ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ, ಮಹಿಳಾ ಪ್ರತಿಭಟನಾಕಾರರ ಮೇಲಿನ ಹಿಂಸಾಚಾರ ಹಾಗೂ ಪೊಲೀಸ್ ಸಿಬ್ಬಂದಿಗೆ ಗಾಯವಾದ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಐವರು ಸದಸ್ಯರ ಉನ್ನತ ಮಟ್ಟದ ತನಿಖಾ ಸಮಿತಿಗೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ಪೀಠ ಈ ನಿರ್ದೇಶನ ನೀಡಿದೆ. ಜುಲೈ 20ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಪರಸ್ಪರ ವಿಭಿನ್ನ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನ್ಯಾಯಾಲಯವು ಸ್ವತಂತ್ರ ತನಿಖೆಗೆ ಒತ್ತು ನೀಡಿದೆ.
ತನಿಖೆಯ ಮೊದಲ ಹಂತದಲ್ಲಿ ನಾಲ್ಕು ಪ್ರಮುಖ ವಿಚಾರಗಳನ್ನು ಪರಿಶೀಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್ ಬಳಸಲಾಗಿತ್ತೇ? ಮಹಿಳಾ ಪ್ರತಿಭಟನಾಕಾರರ ಮೇಲೆ ನಿರ್ದಿಷ್ಟವಾಗಿ ಹಿಂಸಾಚಾರ ಅಥವಾ ಕಿರುಕುಳ ನಡೆದಿತ್ತೇ? ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಗೆ ಉಂಟಾದ ಗಾಯಗಳ ವಾಸ್ತವಾಂಶವೇನು? ಪ್ರತಿಭಟನಾಕಾರರು ಅಥವಾ ಭದ್ರತಾ ಸಿಬ್ಬಂದಿಯಿಂದ ಅತಿಯಾದ ಹಿಂಸಾಚಾರ ನಡೆದಿತ್ತೇ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಯಿತೇ ಎಂಬ ಆರೋಪಗಳನ್ನೂ ಸಮಿತಿ ಪರಿಶೀಲಿಸಲಿದೆ.
ಸುಪ್ರೀಂ ಕೋರ್ಟ್ ಆಗಸ್ಟ್ನಲ್ಲಿ ರಚಿಸಿದ್ದ ಉನ್ನತ ಮಟ್ಟದ ತನಿಖಾ ಸಮಿತಿಗೆ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಗಾಯಗೊಂಡ ಪ್ರತಿಭಟನಾಕಾರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆಯೂ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.