ನವದೆಹಲಿ, ಮಾ. 26(DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ಭಾರತ್ ಬಂದ್ಗೆ ಕರೆ ನೀಡಿದ ಬೆನ್ನಲ್ಲೇ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿವೆ ಎನ್ನಲಾಗಿದೆ.

ರೈಲುಗಳ ಸಂಚಾರಗಳಿಗೆ ಅಮೃತಸರ ಸೇರಿದಂತೆ ಪಂಜಾಬ್ನ ಅನೇಕ ನಗರಗಳಲ್ಲಿ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದು, ದೆಹಲಿಯ ಗಾಜಿಪುರ, ಸಿಂಘು ಗಡಿಗಳಲ್ಲಿ ಧರಣಿ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಆಂದ್ರಪ್ರದೇಶದ ವಿಶಾಖಪಟ್ಟಣದಲ್ಲಿ ಎಡಪಕ್ಷಗಳ ಕಾರ್ಯಕರ್ತರು ರಸ್ತೆಗಳನ್ನು ತಡೆದು, ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿ ಸೇರಿದಂತೆ ದೇಶದಾದ್ಯಂತ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ಶಾಂತಿಯುತ ಬಂದ್ ಆಚರಿಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.
ಇನ್ನು ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈವರೆಗೂ 11 ಸುತ್ತಿನ ಮಾತುಕತೆ ನಡೆದಿದ್ದು, ಸಮಸ್ಯೆ ಇತ್ಯರ್ಥವಾಗಿಲ್ಲ.