ಬೆಂಗಳೂರು, ಮಾ. 30 (DaijiworldNews/TA): ಕರ್ನಾಟಕದ ಪ್ರತಿಯೊಬ್ಬ ಶಾಸಕರಿಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗೆ ಮೂರು ಟಿಕೆಟ್ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಇತರ ರಾಜ್ಯಗಳಲ್ಲಿನ ಟಿಕೆಟ್ ಹಂಚಿಕೆ ಪದ್ಧತಿಗಳನ್ನು ಉಲ್ಲೇಖಿಸಿ ಈ ಕ್ರಮವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಕಳೆದ ವಾರ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ಪ್ರತಿಯೊಬ್ಬ ಶಾಸಕರಿಗೂ ನಾಲ್ಕು ವಿಐಪಿ ಟಿಕೆಟ್ಗಳನ್ನು ಒದಗಿಸುವಂತೆ ಸರ್ಕಾರವನ್ನು ಕೇಳಿದ್ದರು. ಈ ವೇಳೆ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಶಾಸಕರನ್ನು ಅಗೌರವದಿಂದ ನಡೆಸಿಕೊಂಡಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಸಭೆ ನಡೆಸಿದ ಡಿಕೆ ಶಿವಕುಮಾರ್, ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಇತರೆ ಪಾಲುದಾರರೊಂದಿಗೆ ಮಾತುಕತೆ ನಡೆಸಿ, ಮೂರು ಟಿಕೆಟ್ಗಳಿಗೆ ಒಪ್ಪಂದಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. “ಯಾರಿಗಾದರೂ ಟಿಕೆಟ್ ಬೇಡವೆಂದರೆ ಸ್ಪೀಕರ್ಗೆ ಪತ್ರ ಬರೆಯಬಹುದು. ನಾವು ಯಾರನ್ನೂ ಒತ್ತಾಯಿಸುವುದಿಲ್ಲ,” ಎಂದು ಅವರು ಹೇಳಿದರು.
ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಡಿಎನ್ಎ ಎಂಡಿ ವೆಂಕಟ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಿಇಒ ರಾಜೇಶ್ ಮೆನನ್ ಭಾಗವಹಿಸಿದ್ದರು.
ಇನ್ನು, ಅಂತರರಾಷ್ಟ್ರೀಯ ಪಂದ್ಯಗಳಿಗೆ ಶಾಸಕರಿಗೆ ಎರಡು ಟಿಕೆಟ್ಗಳನ್ನು ನೀಡಲಾಗುತ್ತದೆ. ಅಗತ್ಯವಿದ್ದರೆ ಇನ್ನೂ ಎರಡು ಟಿಕೆಟ್ಗಳನ್ನು ಖರೀದಿಸಲು ಅವಕಾಶ ಇರಲಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್, “ಇದು ವಿಐಪಿ ಸಂಸ್ಕೃತಿಯ ಉದಾಹರಣೆ. ನನಗೆ ಟಿಕೆಟ್ ಬೇಡ” ಎಂದು ಹೇಳಿದ್ದಾರೆ.
ಇತರ ರಾಜ್ಯಗಳ ಪದ್ಧತಿಗಳನ್ನು ಪರಿಶೀಲಿಸಿದ್ದಾಗಿ ಹೇಳಿದ ಶಿವಕುಮಾರ್, “ರಾಜಸ್ಥಾನ, ಮುಂಬೈ, ದೆಹಲಿ, ಕೋಲ್ಕತ್ತಾ, ಗುಜರಾತ್ ಮೊದಲಾದ ಕಡೆಗಳಲ್ಲಿ 50-60% ಟಿಕೆಟ್ಗಳನ್ನು ಸರ್ಕಾರಿ ಪ್ರತಿನಿಧಿಗಳಿಗೆ ನೀಡಲಾಗುತ್ತದೆ. ಆದರೆ ಕರ್ನಾಟಕದಲ್ಲಿ ಹೋಲಿಸಿದರೆ ಕಡಿಮೆ ಹಸ್ತಕ್ಷೇಪ ಇದೆ” ಎಂದು ಸ್ಪಷ್ಟಪಡಿಸಿದರು. ಈ ನಡುವೆ, ಐಪಿಎಲ್ 2026 ಪಂದ್ಯಗಳು ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ.