ಮಂಗಳೂರು, ಮೇ. 09 (DaijiworldNews/AA): ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಇನ್ಸ್ಟಾಗ್ರಾಂ ಫೇಜ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ.

'beary_royal_nawab' ಧಾರ್ಮಿಕ ಮತ್ತು ಸಮುದಾಯ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ವಿಷಯವನ್ನು ಪೋಸ್ಟ್ ಮಾಡುತ್ತಿತ್ತು. ಈ ಪೋಸ್ಟ್ಗಳು ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷವನ್ನು ಉತ್ತೇಜಿಸುತ್ತಿದ್ದವು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಮೂರು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ಮಂಗಳೂರು ನಗರ ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪೇಜ್ ನ ಬಗ್ಗೆ ಮಾಹಿತಿ ನೀಡುವಂತೆ, ಸಂಬಂಧಪಟ್ಟ Law Enforcement Agency ರವರಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು. ಅದರಂತೆ ಸಂಬಂಧಪಟ್ಟ Law Enforcement Agency ರವರು 'beary_royal_nawab' ಎಂಬ ಇನ್ ಸ್ಟಾ ಗ್ರಾಂ ಫೇಜ್ ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿರುತ್ತಾರೆ.
ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಉಪ ಆಯುಕ್ತರಾದ ಸಿದ್ಧಾರ್ಥ್ ಗೋಯಲ್ ಮತ್ತು ರವಿಶಂಕರ್ ಅವರ ಮೇಲ್ವಿಚಾರಣೆಯಲ್ಲಿ ಮಂಗಳೂರು ನಗರ ಪೊಲೀಸರು ತನಿಖೆಯ ನೇತೃತ್ವ ವಹಿಸಿದ್ದಾರೆ, ಸಿಇಎನ್ ಪೊಲೀಸ್ ಠಾಣೆ ತನಿಖೆಯನ್ನು ಮುಂದುವರೆಸಿದೆ ಎಂದು ಪೊಲೀಸರು ಹೇಳಿದ್ದಾರೆ.