ಗಂಗೊಳ್ಳಿ, ನ 15 (DaijiworldNews/HR): ಗಂಗೊಳ್ಳಿಯಲ್ಲಿ ನಡೆದ ಬೋಟ್ ಅಗ್ನಿ ದುರಂತ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![](https://daijiworld.ap-south-1.linodeobjects.com/Linode/img_tv247/hr-151123-DC.jpg)
![](https://daijiworld.ap-south-1.linodeobjects.com/Linode/img_tv247/hr-151123-DC1.jpg)
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಸ್ಥಳೀಯ ಮೀನುಗಾರ ಮುಖಂಡರು ಮತ್ತು ನಷ್ಟಕ್ಕೆ ಒಳಗಾದ ಬೋಟ್ ಮಾಲೀಕರ ಜೊತೆ ಚರ್ಚೆ ನಡೆಸಿ ದುರಂತದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಅವರು, ಸರಕಾರ ಈ ದುರ್ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿದೆ. ಮುಖ್ಯಮಂತ್ರಿ ಕಛೇರಿಯಿಂದ ಘಟನೆ ಬಗ್ಗೆ ಮಾಹಿತಿ ಕೇಳಿದ್ದು, ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮೀನುಗಾರಿಕೆ ಇಲಾಖೆ ಸಚಿವರು ಕೂಡ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದು, ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಿ ಹೆಚ್ಚಿನ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.
ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಅಗ್ನಿಶಾಮಕ ದಳದ ಘಟಕ ಪ್ರಾರಂಭಿಸುವ ಬಗ್ಗೆ, ಪಂಪ್ ಹೌಸ್ ನಿರ್ಮಾಣದ ಮತ್ತು ಮ್ಯಾಂಗನೀಸ್ ವಾರ್ಫ್ ಪ್ರದೇಶದ ಸ್ವಚ್ಛತೆ ಬಗ್ಗೆ ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹಾಗೂ ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ ಅವರು, ಬೋಟ್ ಅಗ್ನಿ ದುರಂತದಲ್ಲಿ ಬೋಟ್ ಮಾಲೀಕರು ಹಾಗೂ ಇದನ್ನೇ ನಂಬಿಕೊಂಡಿರುವ ಮೀನುಗಾರ ಕುಟುಂಬಗಳು ಅನುಭವಿಸುತ್ತಿರುವ ಸಂಕಷ್ಟ ತಿಳಿದಿದ್ದು, ಇವರ ಕಷ್ಟಗಳಿಗೆ ಸ್ಪಂದಿಸುವ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.
ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ, ಅಂಜನಾದೇವಿ, ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ (ತನಿಖೆ) ಬಸವರಾಜ್, ಸ್ಥಳೀಯ ಬೋಟ್ ಮಾಲೀಕರು, ಮೀನುಗಾರ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.